ತವರಿನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಟೂರ್ನಿಗೆ 15 ಮಂದಿ ಆಟಗಾರರ ಭಾರತ ತಂಡವನ್ನ ಪ್ರಕಟಿಸಲಾಗಿದ್ದು, ಟೀಂ ಇಂಡಿಯಾದ ಭರವಸೆಯ ಬ್ಯಾಟ್ಸ್ಮನ್ ಸೂರ್ಯಕುಮಾರ್ ಯಾದವ್ ವಿಶ್ವಕಪ್ಗೆ ಭಾರತ ತಂಡದಲ್ಲಿ ಸ್ಥಾನ ಪಡೆಯುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.
ಪ್ರಸ್ತುತ ನಡೆಯುತ್ತಿರುವ ಏಷ್ಯಾಕಪ್ ಟೂರ್ನಿಯಲ್ಲಿ ಸ್ಥಾನ ಪಡೆದಿರುವ 17 ಆಟಗಾರರಲ್ಲಿ ಸೂರ್ಯಕುಮಾರ್, ಏಕದಿನ ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದಿದ್ದರೆ. ಯುವ ಆಟಗಾರರಾದ ತಿಲಕ್ ವರ್ಮ ಹಾಗೂ ಪ್ರಸಿದ್ಧ ಕೃಷ್ಣ ಅವರನ್ನ ವಿಶ್ವಕಪ್ ತಂಡದಿಂದ ಕೈಬಿಡಲಾಗಿದೆ. ಈ ನಡುವೆ ಭಾರತ ತಂಡದ ಟಿ20 ಕ್ರಿಕೆಟ್ನ ಸ್ಟಾರ್ ಬ್ಯಾಟರ್ ಆಗಿರುವ ಸೂರ್ಯಕುಮಾರ್ ಅವರನ್ನ ಏಕದಿನ ವಿಶ್ವಕಪ್ ತಂಡಕ್ಕೆ ಆಯ್ಕೆ ಮಾಡಿರುವುದು ಸಾಕಷ್ಟು ಕುತೂಹಲ ಮೂಡಿಸಿದೆ.
ಭಾರತದ ಪರ ಟಿ20 ಕ್ರಿಕೆಟ್ನಲ್ಲಿ ತಮ್ಮ ಸ್ಪೋಟಕ ಬ್ಯಾಟಿಂಗ್ ಮೂಲಕ ಅಬ್ಬರಿಸಿರುವ ಸೂರ್ಯಕುಮಾರ್, ಟಿ20 ಕ್ರಿಕೆಟ್ನ ನಂ.1 ಬ್ಯಾಟ್ಸ್ಮನ್ ಎನಿಸಿದ್ದಾರೆ. ಇದೇ ಕಾರಣಕ್ಕೆ ಏಕದಿನ ತಂಡದಲ್ಲೂ ಸ್ಥಾನ ಪಡೆದಿದ್ದ ಸೂರ್ಯಕುಮಾರ್, ಪ್ರಸಕ್ತ ವರ್ಷದಲ್ಲಿ ಏಕದಿನ ಕ್ರಿಕೆಟ್ನಲ್ಲಿ ನಿರೀಕ್ಷಿತ ಪ್ರದರ್ಶನ ನೀಡಿಲ್ಲ. ಆಸ್ಟ್ರೇಲಿಯಾ ವಿರುದ್ಧ ತವರಿನಲ್ಲಿ ನಡೆದ ಮೂರು ಪಂದ್ಯಗಳ ಏಕದಿನ ಸರಣಿಯ ಮೂರು ಪಂದ್ಯಗಳಲ್ಲೂ ಡಕೌಟ್ ಆಗುವ ಮೂಲಕ ಭಾರೀ ನಿರಾಸೆ ಮೂಡಿಸಿದ್ದರು. ಇದಾದ ಬಳಿಕವೂ ಏಕದಿನ ಕ್ರಿಕೆಟ್ನಲ್ಲಿ ಸತತ ಬ್ಯಾಟಿಂಗ್ ವೈಫಲ್ಯಕ್ಕೆ ಸಿಲುಕಿರುವ ಸೂರ್ಯ, 2023ರ ಅಕ್ಟೋಬರ್ ಹಾಗೂ ನವೆಂಬರ್ನಲ್ಲಿ ನಡೆಯುವ ಏಕದಿನ ವಿಶ್ವಕಪ್ಗೆ ಭಾರತ ತಂಡದಲ್ಲಿ ಸ್ಥಾನ ಪಡೆದಿರುವುದು ಅಚ್ಚರಿ ಮೂಡಿಸಿದೆ.
ಟಿ20ಯಲ್ಲಿ ದೊಡ್ಡ ಯಶಸ್ಸು ಕಂಡಿರುವ ಸೂರ್ಯಕುಮಾರ್, ಏಕದಿನ ಕ್ರಿಕೆಟ್ನಲ್ಲಿ ನಿರೀಕ್ಷಿತ ಯಶಸ್ಸು ಕಂಡಿಲ್ಲ. ಹೀಗಾಗಿ ಏಕದಿನ ಕ್ರಿಕೆಟ್ನಲ್ಲಿ ಸತತ ಬ್ಯಾಟಿಂಗ್ ವೈಫಲ್ಯದ ನಡುವೆಯೂ ಬಿಸಿಸಿಐ ಆಯ್ಕೆ ಮಂಡಳಿ ಸೂರ್ಯಕುಮಾರ್ ಅವರನ್ನ ತಂಡಕ್ಕೆ ಆಯ್ಕೆ ಮಾಡುವ ಮೂಲಕ ಮಹತ್ವದ ಟೂರ್ನಿಯಲ್ಲಿ ಆಡುವ ಅವಕಾಶ ಕಲ್ಪಿಸಿದ್ದಾರೆ. ಏಕದಿನ ವಿಶ್ವಕಪ್ಗೆ ಮುನ್ನ ನಡೆಯುವ ಏಕದಿನ ಪಂದ್ಯಗಳಲ್ಲಿ ಸೂರ್ಯಕುಮಾರ್ ಯಾವ ರೀತಿ ಪ್ರದರ್ಶನ ನೀಡುತ್ತಾರೆ ಕಾದುನೋಡಬೇಕಿದೆ.
World Cup, Team India, Surya Kumar Yadav, BCCI, Sports Karnataka