ಗಾಯದ ಸಮಸ್ಯೆಯಿಂದಾಗಿ ಕಳೆದ ಹಲವು ತಿಂಗಳಿನಿಂದ ಭಾರತ ತಂಡದಿಂದ ಹೊರಗುಳಿದಿದ್ದ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ, ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಅಬ್ಬರಿಸೋಕ್ಕೆ ಸಜ್ಜಾಗುತ್ತಿದ್ದಾರೆ.
ಕಳೆದ ಅಕ್ಟೋಬರ್ನಲ್ಲಿ ನಡೆದ ಟಿ20 ವಿಶ್ವಕಪ್ ಟೂರ್ನಿಯಿಂದಲೂ ಟೀಂ ಇಂಡಿಯಾದಿಂದ ಹಾರ್ದಿಕ್ ಪಾಂಡ್ಯ ಹೊರಗುಳಿದಿದ್ದರು. ಇದೀಗ ಗಾಯದ ಸಮಸ್ಯೆಯಿಂದ ಚೇತರಿಕೆ ಕಂಡಿರುವ ಹಾರ್ದಿಕ್ ಪಾಂಡ್ಯ, ಸ್ಟ್ರಾಂಗ್ ಕಮ್ಬ್ಯಾಕ್ ಮಾಡಲು ಸಿದ್ಧರಾಗಿದ್ದಾರೆ. ಈ ನಡುವೆ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ(ಎನ್ಸಿಎ) ಫಿಟ್ನೆಸ್ ಶಿಬಿರವನ್ನು ನಡೆಸಲಾಗುತ್ತಿದ್ದು, ಈ ಶಿಬಿರದಲ್ಲಿ ಪಾಲ್ಗೊಳ್ಳುವಂತೆ ಟೀಂ ಇಂಡಿಯಾದ ಸ್ಟಾರ್ ಆಲ್ರೌಂಡರ್ ಅವರಿಗೆ ಆಹ್ವಾನ ನೀಡಲಾಗಿದೆ ಎಂದು ತಿಳಿದು ಬಂದಿದೆ. ಹಾರ್ದಿಕ್ ಪಾಂಡ್ಯ ಅವರೊಂದಿಗೆ ಟೀಂ ಇಂಡಿಯಾದ ಇನ್ನಿತರ ಆಟಗಾರರು ಸಹ ಈ ಕ್ಯಾಂಪ್ನಲ್ಲಿ ಭಾಗವಹಿಸಲಿದ್ದಾರೆ ಎನ್ನಲಾಗಿದೆ.
ಅಲ್ಲದೆ ಇನ್ನೆರಡು ದಿನಗಳಲ್ಲಿ ಹಾರ್ದಿಕ್ ಪಾಂಡ್ಯ, ಶಿಬಿರದಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಮುಂಬರುವ ಟಿ20 ವಿಶ್ವಕಪ್ ಪಂದ್ಯಾವಳಿಯನ್ನು ಗಮನದಲ್ಲಿ ಇರಿಸಿಕೊಂಡು ಕೋಚ್ ರಾಹುಲ್ ದ್ರಾವಿಡ್ ಹಾಗೂ ತಂಡ್ ಆಯ್ಕೆ ಮಂಡಳಿ ಈ ಶಿಬಿರವನ್ನು ನಡೆಸಲಾಗುತ್ತಿದೆ. ಹಾರ್ದಿಕ್ ಪಾಂಡ್ಯ ಕಳೆದ ನವೆಂಬರ್ 8ರಂದು ಕಡೆಯ ಬಾರಿ ಭಾರತ ತಂಡದಲ್ಲಿ ಆಡಿದ್ದರು.
ಈ ನಡುವೆ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಪ್ರಸಕ್ತ ಸಾಲಿನ ಐಪಿಎಲ್ನಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು ಮುನ್ನಡೆಸಲಿದ್ದಾರೆ. ಹೀಗಾಗಿ ಬೆಂಗಳೂರಿನಲ್ಲಿ ಫಿಟ್ನೆಸ್ ಕ್ಯಾಂಪ್ ನಡೆಸುತ್ತಿರುವುದಕ್ಕೆ ಗುಜರಾತ್ ಟೈಟನ್ಸ್ ಫ್ರಾಂಚೈಸಿ ಅಸಮಾಧಾನ ವ್ಯಕ್ತಪಡಿಸಿದೆ ಎನ್ನಲಾಗಿದೆ. ಮಾರ್ಚ್ 26ರಿಂದ ಐಪಿಎಲ್ ಟೂರ್ನಿ ಆರಂಭವಾಗಲಿದ್ದು, ಈ ಸಂದರ್ಭದಲ್ಲಿ ಫಿಟ್ನೆಸ್ ಶಿಬಿರವನ್ನು ನಡೆಸುತ್ತಿರುವ ಬಿಸಿಸಿಐ ನಿರ್ಧಾರಕ್ಕೆ ಗುಜರಾತ್ ಫ್ರಾಂಚೈಸಿ ಬೇಸರ ವ್ಯಕ್ತಪಡಿಸಿದೆ ಎಂದು ತಿಳಿದು ಬಂದಿದೆ.