ಐಪಿಎಲ್ 15ನೇ ಆವೃತ್ತಿ ಮುಕ್ತಾಯದ ಹಂತಕ್ಕೆ ತಲುಪಿದ್ದು, ಇದರ ಬೆನ್ನಲ್ಲೇ ಸೌತ್ ಆಫ್ರಿಕಾ ಹಾಗೂ ಐರ್ಲೆಂಡ್ ವಿರುದ್ಧದ ಟಿ20 ಸರಣಿಗೆ ಟೀಂ ಇಂಡಿಯಾ ಆಟಗಾರರ ಆಯ್ಕೆ ಶುರುವಾಗಿದೆ. ತವರಿನಲ್ಲಿ ನಡೆಯುವ ಈ ಸರಣಿಯಲ್ಲಿ ಪ್ರಮುಖ ಆಟಗಾರರು ವಿಶ್ರಾಂತಿ ಪಡೆಯುತ್ತಿರುವ ಹಿನ್ನೆಲೆಯಲ್ಲಿ ಹಾರ್ದಿಕ್ ಪಾಂಡ್ಯ ಅಥವಾ ಶಿಖರ್ ಧವನ್ ಸಾರಥ್ಯದಲ್ಲಿ ಭಾರತ ಕಣಕ್ಕಿಳಿಯಲಿದೆ.
ಸೌತ್ ಆಫ್ರಿಕಾ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಗೆ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮ, ಕೆ.ಎಲ್.ರಾಹುಲ್, ರಿಷಬ್ ಪಂತ್, ಜಸ್ಪ್ರೀತ್ ಬುಮ್ರ ಅವರುಗಳಿಗೆ ವಿಶ್ರಾಂತಿ ನೀಡಲಾಗುತ್ತಿದೆ. ಹೀಗಾಗಿ ತವರಿನಲ್ಲಿ ನಡೆಯಲಿರುವ ಸೌತ್ ಆಫ್ರಿಕಾ ವಿರುದ್ಧದ ಸರಣಿ ಹಾಗೂ ಇಂಗ್ಲೆಂಡ್ ಪ್ರವಾಸಕ್ಕೂ ಮುನ್ನ ನಡೆಯಲಿರುವ 2 ಪಂದ್ಯಗಳ ಟಿ20 ಸರಣಿಗೆ ಹಾರ್ದಿಕ್ ಪಾಂಡ್ಯ ಅಥವಾ ಶಿಖರ್ ಧವನ್ ಭಾರತ ತಂಡವನ್ನು ಮುನ್ನಡೆಸುವ ಸಾಧ್ಯತೆ ಇದೆ.
ಭಾರತದ ವಿರುದ್ಧ ನಡೆಯುವ ಟಿ20 ಸರಣಿಗೆ ಮೇ 22ರಂದು ಸೌತ್ ಆಫ್ರಿಕಾ ತಂಡ ಪ್ರಕಟಗೊಳ್ಳುವ ಸಾಧ್ಯತೆ ಇದೆ. ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಟಿ20 ಸರಣಿ ಜೂನ್ 9ರಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆಯಲಿದೆ. ಉಳಿದಂತೆ ಕಟಕ್, ವಿಶಾಖಪಟ್ಟಣಂ, ರಾಜ್ಕೋಟ್ ಹಾಗೂ ಬೆಂಗಳೂರಿನಲ್ಲಿ ಸರಣಿಯ ಉಳಿದ ಪಂದ್ಯಗಳು ನಡೆಯಲಿದೆ.
ವಿರಾಟ್ ಕೊಹ್ಲಿಗೂ ಬ್ರೇಕ್:
ಈ ನಡುವೆ ಪ್ರಸಕ್ತ ಐಪಿಎಲ್ನಲ್ಲಿ ಸತತ ಫಾರ್ಮ್ ಸಮಸ್ಯೆ ಎದುರಿಸುತ್ತಿರುವ ಟೀಂ ಇಂಡಿಯಾ ರನ್ ಮಷಿನ್ ವಿರಾಟ್ ಕೊಹ್ಲಿ ಅವರಿಗೂ ವಿಶ್ರಾಂತಿ ನೀಡಲಾಗುತ್ತಿದೆ. ಮುಂದಿನ ಜುಲೈನಲ್ಲಿ ನಡೆಯಲಿರುವ ಇಂಗ್ಲೆಂಡ್ ಪ್ರವಾಸವನ್ನ ಗಮನದಲ್ಲಿಟ್ಟುಕೊಂಡು ಸೌತ್ ಆಫ್ರಿಕಾ ಹಾಗೂ ಐರ್ಲೆಂಡ್ ವಿರುದ್ಧದ ಸರಣಿಗೆ ವಿರಾಟ್ ಕೊಹ್ಲಿ ಅವರಿಗೆ ವಿಶ್ರಾಂತಿ ನೀಡಲಾಗುತ್ತಿದೆ.
ಯುವ ಆಟಗಾರರಿಗೆ ಚಾನ್ಸ್:
ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಲಾಗುತ್ತಿರುವ ಹಿನ್ನೆಲೆಯಲ್ಲಿ ಸೌತ್ ಆಫ್ರಿಕಾ ಸರಣಿಗೆ ಹಲವು ಯುವ ಆಟಗಾರರಿಗೆ ಅವಕಾಶ ದೊರೆಯುವ ಸಾಧ್ಯತೆ ಇದೆ. ಪ್ರಮುಖವಾಗಿ ಬೌಲಿಂಗ್ ವಿಭಾಗದಲ್ಲಿ ಯುವ ವೇಗಿ ಉಮ್ರಾನ್ ಮಲ್ಲಿಕ್, ಅರ್ಶದೀಪ್ ಸಿಂಗ್, ಮೋಸಿನ್ ಖಾನ್ ಅವರಿಗೆ ಅವಕಾಶ ಸಿಗುವ ಸಾಧ್ಯತೆ ಇದೆ. ಉಳಿದಂತೆ ಬ್ಯಾಟಿಂಗ್ನಲ್ಲಿ ಋತುರಾಜ್ ಗಾಯಕ್ವಾಡ್, ಇಶಾನ್ ಕಿಶನ್, ಶ್ರೇಯಸ್ ಅಯ್ಯರ್, ದೀಪಕ್ ಹೂಡ ತಂಡದಲ್ಲಿ ಆಡಲಿದ್ದಾರೆ. ಬೌಲಿಂಗ್ನಲ್ಲಿ ಭುವನೇಶ್ವರ್ ಕುಮಾರ್, ಪ್ರಸಿದ್ಧ ಕೃಷ್ಣ, ಹರ್ಷಲ್ ಪಟೇಲ್, ಅವೇಶ್ ಖಾನ್ ಜೊತೆಗೆ ಸ್ಪಿನ್ ವಿಭಾಗದಲ್ಲಿ ಆರ್. ಅಶ್ವಿನ್, ಯುಜುವೇಂದ್ರ ಚಹಲ್ ಹಾಗೂ ಕುಲ್ದೀಪ್ ಯಾದವ್ ಅವರು ಕಾಣಿಸಿಕೊಳ್ಳುವ ಸಾಧ್ಯತೆ ಇದೆ.