ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ 12ನೇ ಆವೃತ್ತಿಯ ಐಪಿಎಲ್ನಲ್ಲಿ ಯಾವುದೂ ಅಂದುಕೊಂಡಂತೆ ನಡೆಯುತ್ತಿಲ್ಲ. ಮೊದಲಿಗೆ ರವೀಂದ್ರ ಜಡೇಜಾ ನಾಯಕನಾಗಿ ಯಶಸ್ಸು ಕಾಣಲಿಲ್ಲ. ಬಳಿಕ ಮಹೇಂದ್ರ ಸಿಂಗ್ ಧೋನಿ ಕೈಗೆ ನಾಯಕತ್ವ ಮರಳಿದರೂ ಗೆಲುವಿನ ಸ್ಥಿರತೆ ಕಂಡುಕೊಳ್ಳಲಿಲ್ಲ. ಈಗ ತಂಡದ ಬೆನ್ನೆಲುಬಾಗಿದ್ದ ಮಾಜಿ ನಾಯಕ ಮತ್ತು ಸ್ಟಾರ್ ಆಲ್ ರೌಂಡರ್ ರವೀಂದ್ರ ಜಡೇಜಾ ಟೂರ್ನಿಯಿಂದ ಹೊರ ಬಿದ್ದಿದ್ದಾರೆ.
ಗಾಯದ ಸಮಸ್ಯೆಯಿಂದಾಗಿ ಚೆನ್ನೈ ಸೂಪರ್ ಕಿಂಗ್ಸ್ ತಂಡದಿಂದ ಜಡೇಜಾ ಹೊರಬಿದ್ದಿದ್ದಾರೆ. ಸಾಂಪ್ರದಾಯಿಕ ಎದುರಾಳಿ ಮುಂಬೈ ಇಂಡಿಯನ್ಸ್ ಎದುರಿನ ಮಹತ್ವದ ಪಂದ್ಯಕ್ಕೂ ಮುನ್ನವೇ ರವೀಂದ್ರ ಜಡೇಜಾ, ಐಪಿಎಲ್ ಟೂರ್ನಿಯಿಂದ ಹೊರಬಿದ್ದಿರುವುದು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪಾಲಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.
ರವೀಂದ್ರ ಜಡೇಜಾ ಮೇ 4 ರಂದು ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ದದ ಪಂದ್ಯದಲ್ಲಿಗಾಯಗೊಂಡಿದ್ದರು. ಓಡಿಬಂದು ಡೈವ್ ಹೊಡೆದು ಕ್ಯಾಚ್ ಪಡೆದುಕೊಳ್ಳುವ ವೇಳೆಯಲ್ಲಿ ರವೀಂದ್ರ ಜಡೇಜಾ ಅವರಿಗೆ ಪಕ್ಕೆಲುಬಿನ ಗಾಯಕ್ಕೊಳಗಾಗಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ಲೀಗ್ನಲ್ಲಿ ಇನ್ನು ಮೂರು ಪಂದ್ಯಗಳನ್ನು ಆಡಬೇಕಿದೆ. ಆದರೆ ಜಡೇಜಾ ಟೀಮ್ ಇಂಡಿಯಾದ ಪ್ರಮುಖ ಆಟಗಾರನಾಗಿರುವುದರಿಂದ ವಿಶ್ರಾಂತಿ ನೀಡಲಾಗಿದೆ.
ಜಡೇಜಾ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಿಂದ ಹೊರಗುಳಿದಿದ್ದರು. ಚೆನ್ನೈ ಸೂಪರ್ ಕಿಂಗ್ಸ್ ತಂಡ ಈ ಬಾರಿಯ ಐಪಿಎಲ್ನ ಲೀಗ್ ಹಂತದಲ್ಲಿಮುಂಬೈ ಇಂಡಿಯನ್ಸ್, ಗುಜರಾತ್ ಟೈಟಾನ್ಸ್ ಹಾಗೂ ರಾಜಸ್ಥಾನ ರಾಯಲ್ಸ್ ವಿರುದ್ಧದ ಪಂದ್ಯಗಳನ್ನು ಆಡಬೇಕಿದೆ. ಇಲ್ಲಿ ತನಕ ಚೆನ್ನೈ ಸೂಪರ್ ಕಿಂಗ್ಸ್ ತಂಡವು 11 ಪಂದ್ಯಗಳನ್ನಾಡಿ 4 ಗೆಲುವು ಹಾಗೂ 7 ಸೋಲುಗಳೊಂದಿಗೆ 8 ಅಂಕಗಳ ಸಹಿತ ಅಂಕಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ.