ಐಪಿಎಲ್ ಮೆಗಾ ಹರಾಜಿಗೂ ಮುನ್ನ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಸಾಕಷ್ಟು ಲೆಕ್ಕಾಚಾರಗಳು ನಡೆಯುತ್ತಿವೆ. ಐಪಿಎಲ್ನಲ್ಲಿ ಕಳೆದ ಎರಡು ಆವೃತ್ತಿಗಳಲ್ಲಿ ಸ್ಥಿರ ಪ್ರದರ್ಶನ ನೀಡಿರುವ ಡೆಲ್ಲಿ ಕ್ಯಾಪಿಟಲ್ಸ್ ಪ್ರಶಸ್ತಿ ಮಾತ್ರ ಗೆದ್ದಿಲ್ಲ. ಹೀಗಾಗಿ ಸೀಸನ್ 15ರಲ್ಲಿ ಪ್ರಶಸ್ತಿ ಗೆಲ್ಲಲೇಬೇಕು ಅಂತ ಪ್ಲಾನ್ ಮಾಡಿಕೊಂಡಿದೆ. ಹೀಗಾಗಿ ಆಟಗಾರರ ಹರಾಜಿಗೂ ಮುನ್ನ ನಾಲ್ವರು ಆಟಗಾರರನ್ನು ಉಳಿಸಿಕೊಳ್ಳಲು ನಿರ್ಧರಿಸಿದೆ. ನಾಯಕ ರಿಷಭ್ ಪಂತ್ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್ ಉಳಿಸಿಕೊಳ್ಳಲಿದೆ. ಮಾಜಿ ನಾಯಕ ಶ್ರೇಯಸ್ ಅಯ್ಯರ್ ಅವರನ್ನು ಬಿಡುಗಡೆ ಮಾಡಲಿದೆ ಎಂದು ಡೆಲ್ಲಿ ಫ್ರಾಂಚೈಸಿ ಮೂಲಗಳಿಂದ ತಿಳಿದು ಬಂದಿದೆ.
ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕನಾಗಿ ರಿಷಭ್ ಪಂತ್ ಅವರನ್ನೇ ಮುಂದುವರೆಸಲು ಫ್ರಾಂಚೈಸಿ ನಿರ್ಧರಿಸಿದೆ. ಪಂತ್ ಮೊದಲ ಆಯ್ಕೆಯಾಗಿ ಉಳಿಯಲಿದ್ದಾರೆ. ಯುವ ಆರಂಭಿಕ ಆಟಗಾರ ಪೃಥ್ವಿ ಶಾ ಅವರನ್ನೂ ಕೂಡ ರಿಟೈನ್ ಮಾಡಿಕೊಳ್ಳಲು ಬಯಸಿದ್ದಾರೆ ಎಂದು ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯ ಮೂಲಗಳಿಂದ ತಿಳಿದು ಬಂದಿದೆ. ಆಲ್ರೌಂಡರ್ ಅಕ್ಷರ್ ಪಟೇಲ್ ಅವರನ್ನು ಕೂಡ ಡೆಲ್ಲಿ ಕ್ಯಾಪಿಟಲ್ಸ್ ರಿಟೈನ್ ಮಾಡಿಕೊಳ್ಳಲಿದೆ. ಫಾರಿನ್ ಕೋಟಾದಲ್ಲಿ ಅನ್ರಿಚ್ ನೋರ್ಟ್ಜೆ ಅವರನ್ನು ಡೆಲ್ಲಿ ಉಳಿಸಿಕೊಳ್ಳಲಿದೆ ಎಂದು ಹೇಳಲಾಗುತ್ತಿದೆ.
ಸ್ಟಾರ್ ಪ್ಲೇಯರ್ ಶಿಖರ್ ಧವನ್ ಅವರನ್ನು ಕೂಡ ಡೆಲ್ಲಿ ಕ್ಯಾಪಿಟಲ್ಸ್ ರಿಲೀಸ್ ಮಾಡುವ ಸಾಧ್ಯತೆ ಇದೆ. ಆರ್ ಅಶ್ವಿನ್, ಮಾರ್ಕಸ್ ಸ್ಟೊಯಿನಿಸ್, ಶಿಮ್ರಾನ್ ಹೆಟ್ಮೆಯರ್ ಸೇರಿದಂತೆ ಪ್ರಮುಖ ಆಟಗಾರರನ್ನು ಡೆಲ್ಲಿ ಕ್ಯಾಪಿಟಲ್ಸ್ ಬಿಡುಗಡೆ ಮಾಡಲಿದೆ ಎಂದು ಹೇಳಲಾಗುತ್ತಿದೆ. ಒಟ್ಟಿನಲ್ಲಿ ಮೆಗಾ ಆಕ್ಷನ್ಗೂ ಮುನ್ನ ಡೆಲ್ಲಿ ತಂಡ ಲೆಕ್ಕಾಚಾರದಲ್ಲಿ ಮುಳುಗಿದೆ.