ದಕ್ಷಿಣ ಆಫ್ರಿಕಾ -ಟೀಮ್ ಇಂಡಿಯಾ ಕ್ರಿಕೆಟ್ ಸರಣಿ – ಪ್ರೇಕ್ಷಕರಿಗೆ ಮುಚ್ಚಿದ ಬಾಗಿಲು
ಟೀಮ್ ಇಂಡಿಯಾ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟೆಸ್ಟ್ ಸರಣಿಗೆ ಉಭಯ ತಂಡಗಳು ಕಠಿಣ ಅಭ್ಯಾಸದಲ್ಲಿ ನಿರತವಾಗಿವೆ.
ಹೆಡ್ ಕೋಚ್ ರಾಹುಲ್ ದ್ರಾವಿಡ್ ಮಾರ್ಗದರ್ಶನದಲ್ಲಿ ಟೀಮ್ ಇಂಡಿಯಾ ವಿದೇಶಿ ನೆಲದಲ್ಲಿ ಮೊದಲ ಸರಣಿಯನ್ನಾಡುತ್ತಿದೆ.
ಇನ್ನೊಂದೆಡೆ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿಗೆ ಈ ಸರಣಿ ಪ್ರತಿಷ್ಠೆಯ ಕಣವಾಗಿದೆ. ಮುಖ್ಯವಾಗಿ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಮತ್ತು ಟೀಕೆ ಮಾಡಿದವರಿಗೆ ತಕ್ಕ ಉತ್ತರ ನೀಡಲು ವಿರಾಟ್ ಕೊಹ್ಲಿ ಮಾನಸಿಕವಾಗಿ ಸಜ್ಜಾಗಿದ್ದಾರೆ.
ಈ ನಡುವೆ, ಟೆಸ್ಟ್ ಸರಣಿಗೆ ಮುನ್ನವೇ ದಕ್ಷಿಣ ಆಫ್ರಿಕಾದಲ್ಲಿ ಕೋವಿಡ್ ಸೋಂಕಿನ ಆತಂಕ ಕೂಡ ಹೆಚ್ಚಿಸಿದೆ. ಕೋವಿಡ್ ೧೯- ನಾಲ್ಕನೇ ಅಲೆ ಹೆಚ್ಚಾಗಿರುವುದರಿಂದ ದಕ್ಷಿಣ ಆಫ್ರಿಕಾ ಕ್ರಿಕೆಟ್ ಸಂಸ್ಥೆಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.
ಅಷ್ಟೇ ಅಲ್ಲ, ದಕ್ಷಿಣ ಆಫ್ರಿಕಾ ಕ್ರಿಕೆಟ್ ಸಂಸ್ಥೆಯು ದಿಟ್ಟ ನಿರ್ಧಾರವನ್ನು ತೆಗೆದುಕೊಂಡಿದೆ. ಸರಣಿಗೆ ಯಾವುದೇ ರೀತಿಯ ತೊಂದರೆಯಾಗದAತೆ ನೋಡಿಕೊಳ್ಳಲು ಹೆಚ್ಚಿನ ಮುತುವರ್ಜಿಯನ್ನು ವಹಿಸಿದೆ.
ಅಷ್ಟೇ ಅಲ್ಲ, ಮೂರು ಪಂದ್ಯಗಳ ಟೆಸ್ಟ್ ಸರಣಿ ಹಾಗೂ ಮೂರು ಪಂದ್ಯಗಳ ಏಕದಿನ ಸರಣಿಗೆ ಪ್ರೇಕ್ಷಕರಿಗೆ ಕ್ರೀಡಾಂಗಣದಲ್ಲಿ ಪಂದ್ಯ ನೋಡಲು ಅವಕಾಶವಿಲ್ಲ.
ಜೈವಿಕ ಸುರಕ್ಷತೆಯಡಿಯಲ್ಲಿ ಈ ಎರಡು ಸರಣಿಗಳು ನಡೆಯಲಿವೆ. ಈ ಕುರಿತು ದಕ್ಷಿಣ ಆಫ್ರಿಕಾ ಕ್ರಿಕೆಟ್ ಸಂಸ್ಥೆಯು ಬಿಸಿಸಿಐ ಜೊತೆಗೂ ಚರ್ಚೆ ನಡೆಸಿದ ಬಳಿಕವೇ ಈ ನಿರ್ಧಾರವನ್ನು ತೆಗೆದುಕೊಂಡಿದೆ. ಇನ್ನೊಂದೆಡೆ ದಕ್ಷಿಣ ಆಫ್ರಿಕಾ ಎಮ್ಝಾಂನ್ಸಿ ಸೂಪರ್ ಲೀಗ್ ಟೂರ್ನಿಯನ್ನು ಕೂಡ ರದ್ದುಗೊಳಿಸಿದೆ.
ಡಿಸೆಂಬರ್ ೨೬ರಿಂದ ಮೊದಲ ಟೆಸ್ಟ್ ಪಂದ್ಯ ಆರಂಭವಾಗಲಿದೆ. ಈಗಾಗಲೇ ಟೀಮ್ ಇಂಡಿಯಾ ಹೆಡ್ ಕೋಚ್ ರಾಹುಲ್ ದ್ರಾವಿಡ್ ಮಾರ್ಗದರ್ಶನದಲ್ಲಿ ಕಠಿಣ ಅಭ್ಯಾಸವನ್ನು ನಡೆಸುತ್ತಿದೆ.